ಮಡಿಕೇರಿ: ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 03 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಈ ಹಿಂದೆ ಕೋವಿಡ್-19 ಸೋಂಕು ದೃಢಪಟ್ಟಿದ್ದ ಸೋಮವಾರಪೇಟೆ ತಾಲೂಕು ನೆಲ್ಲಿಹುದಿಕೇರಿ ಗ್ರಾಮದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 32 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಜೊತೆಗೆ ಈ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿದ್ದ ವಿರಾಜಪೇಟೆ ತಾಲೂಕು ಪಾಲಿಬೆಟ್ಟ ಗ್ರಾಮದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 27 ವರ್ಷದ ವ್ಯಕ್ತಿಗೂ ಸಹ ಸೋಂಕು ದೃಢಪಟ್ಟಿದೆ.
ಇದರೊಂದಿಗೆ ವಿರಾಜಪೇಟೆ ತಾಲೂಕು ಚೆನ್ನಯ್ಯನಕೋಟೆ ಗ್ರಾಮದ ಹೊಲಮಾಳ ಪ್ರದೇಶದ ನಿವಾಸಿ, ಬೆಂಗಳೂರಿನಿಂದ ಜಿಲ್ಲೆಗೆ ಹಿಂದಿರುಗಿದ್ದ 37 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲೂಕು ಚೆನ್ನಯ್ಯನಕೋಟೆ ಗ್ರಾಮದ ಹೊಲಮಾಳದಲ್ಲಿ ಹೊಸದಾಗಿ ನಿಯಂತ್ರಿತ ಪ್ರದೇಶ (Containment Zone) ವನ್ನು ತೆರೆಯಲಾಗಿದೆ. ಸದ್ಯ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ.
3 ಪ್ರಕರಣಗಳು ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಒಟ್ಟು 43 ಕೋವಿಡ್-19 ಸಕ್ರಿಯ ಪ್ರಕರಣಗಳು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ ಒಟ್ಟು 21 ಆಗಿದೆ ಎಂದು ತಿಳಿಸಿದ್ದಾರೆ.