ಮೈಸೂರು: ನಾಮ ನಿರ್ದೇಶನದ ಮೂಲಕ ಪರಿಷತ್ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡುವ ವಿಶ್ವಾಸ ಇದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ ಸ್ಥಾನಕ್ಕೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರ ಇಲ್ಲ. ತಳಮಟ್ಟದ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟಿರೋದು ಸ್ವಾಗತಾರ್ಹ. ಕೆಲವೊಮ್ಮೆ ನಾವು ಅಂದುಕೊಂಡಿದ್ದಕ್ಕಿಂತ ದೊಡ್ಡ ಸ್ಥಾನಮಾನ ಸಿಗಬಹುದು ಕೆಲವೊಮ್ಮೆ ಏನೂ ಸಿಗದೇ ಇರಬಹುದು ಎಂದು ತಮ್ಮ ಮನಸ್ಸಿನ ದುಗುಡವನ್ನು ತೋಡಿಕೊಂಡರು.
ಇನ್ನು ರಾಜಕಾರಣ ಅಂದರೆ ಸಿಗೋದು, ಪಡೆದುಕೊಳ್ಳುವುದಲ್ಲ ಎಂದ ಅವರು, ನಾನೊಬ್ಬ ಬರಹಗಾರ ನನ್ನ ಪುಸ್ತಕಗಳು ರಾಜಕೀಯಕ್ಕೆ ಸಂಬಂಧಪಟ್ಟಿವೆ. ಲಂಡನ್ ಪಾರ್ಲಿಮೆಂಟ್ ಬಗ್ಗೆ ಪುಸ್ತಕ ಬರೆದಿದ್ದೇನೆ ಈ ಹಿನ್ನೆಲೆಯ ನನ್ನನ್ನು ಸಾಹಿತ್ಯ ಕ್ಷೇತ್ರದಿಂದ ಆಯ್ಕೆ ಮಾಡಿ ಎಂದು ಸಿಎಂ ಬಳಿ ಕೇಳಿಕೊಂಡಿದ್ದೇನೆ ಅದಕ್ಕೆ ಅವರು ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ತಿಳಿಸಿದರು.
ನನ್ನನ್ನು ನಾಮನಿರ್ದೇಶನ ಮಾಡಲು ಯಾವುದೇ ಕಾನೂನಿನ ತೊಡಕಿಲ್ಲ. ಎಂಟಿಬಿ ನಾಗರಾಜ್ ಆಯ್ಕೆಗೆ ತೊಡಕಿಲ್ಲ ಅನ್ನೋದಾದರೆ ನನಗೆ ಏಕೆ ತೊಡಕಾಗುತ್ತದೆ? ನನಗೂ ಕಾನೂನಿನ ಅರಿವಿದೆ. ನಮ್ಮ ಅನರ್ಹತೆ ಇದ್ದದ್ದು ಕೇವಲ ಕೆಳಮನೆಗೆ ಮಾತ್ರ. ಮೇಲ್ಮನೆಗೆ ಆಯ್ಕೆಯಾಗುವುದಕ್ಕೆ ಯಾವುದೇ ಅಡ್ಡಿಯಿಲ್ಲ. ಸಾಹಿತ್ಯ ಕ್ಷೇತ್ರದಿಂದ ನನ್ನನ್ನು ನಾಮನಿರ್ದೇಶನ ಮಾಡುವ ವಿಶ್ವಾಸವಿದೆ ಎಂದು ಹೇಳಿದರು.