
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟವನ್ನು ಕಾಪಾಡಬೇಕು, ಲೋಪವೆಸಗಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕಠಣಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಮುನಿಯಪ್ಪ ಅವರು ಸೋಮವಾರ ವಿಧಾನ ಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನ್ಸಿ ಮುಖ್ಯಸ್ಥರೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ತಿಳಿಸಿದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ(MSP) ರೈತರಿಂದ ಖರೀದಿಸುವ ರಾಗಿ, ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ MSPಯ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಅಧಿಕಾರಿಗಳು ಸ್ಥಳದಲ್ಲಿಯೇ ಅವರ ಮೇಲೆ ಕ್ರಮ ತೆಗೆದುಕೊಳ್ಳುಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿ ಕ್ವಿಂಟಾಲ್ ರಾಗಿಗೆ 4,290 ರೂ.ಗಳನ್ನು ಹಾಗೂ ಪ್ರತಿ ಕ್ವಿಂಟಾಲ್ ಹೈಬ್ರೀಡ್ ಜೋಳಕ್ಕೆ 3,371 ಹಾಗೂ ಮಾಲದಂಡಿ ಜೋಳ 3,421, ಭತ್ತಕ್ಕೆ ಸಾಮಾನ್ಯವಾಗಿ ಪ್ರತಿ ಕ್ವಿಂಟಾಲ್ 2,300 ಗ್ರೇಡ್ ಎ2,320 ದರ ನಿಗದಿಯಾಗಿದ್ದು, ಈ ದರದಲ್ಲಿ ರೈತರಿಂದ ಖರೀದಿಸಿ ಅವರಿಗೆ ಸರಿಯಾದ ಸಮಯಕ್ಕೆ ಹಣ ಸಂದಾಯ ಮಾಡಬೇಕು ಎಂದರು.
ಜಿಲ್ಲಾಧಿಕಾರಿಗಳು ಖರೀದೀಕೇಂದ್ರಗಳ ಸ್ಥಳಗಳಲ್ಲಿ ರೈತರಿಗೆ ಕುಡಿಯುವ ನೀರು ಹಾಗೂ ಶಾಮಿಯಾನದ ವ್ಯವಸ್ಥೆಯನ್ನು ಕಲ್ಪಿಸಬೇಕು. ಕಾರಣ ಮಾರ್ಚ್ ತಿಂಗಳಲ್ಲಿ ಹೆಚ್ಚಿನ ಬಿಸಿಲಿರುವುದರಿಂದ ರೈತರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು ಎಂದರು.
ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ 15 ಕೆಜಿ ಅಕ್ಕಿ ವಿತರಿಸಲು ತೀರ್ಮಾನಿಸಿದ್ದು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳೇ ನೇರವಾಗಿ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡಬೇಕು. ರಾಗಿಯನ್ನು ಖರೀದಿಸುವ ಕೇಂದ್ರಗಳಲ್ಲಿ ತೂಕದಲ್ಲಿ ವ್ಯತ್ಯಾಸಗಳು ಕಾಣದಂತೆ ನಿಗಾವಹಿಸಬೇಕು. ಲೋಪವೆಸಗಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅಮಾನತು ಮಾಡಬೇಕು ಎಂದು ಜಿಲ್ಲಾಧಿಕಾರಗಳಿಗೆ ಆದೇಶ ಮಾಡಿದರು.
ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್, ಆಯುಕ್ತರಾದ ವಾಸಿ ರೆಡ್ಡಿ ವಿಜಯ ಜೋತ್ನಾ, ನಿಗಮ ನಿರ್ದೇಶಕ ಚಂದ್ರಕಾತ್, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರಾದ ಎಂ.ಎಸ್.ಎನ್. ಬಾಬು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.