NEWSನಮ್ಮಜಿಲ್ಲೆ

ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಪ್ರಾತಿನಿಧ್ಯ ಕಲ್ಪಿಸಿ: ಆಯೋಗದ ಅಧ್ಯಕ್ಷ  ಪ್ರೊ.ಗೋವಿಂದ ರಾವ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿನ ಶಿಕ್ಷಣ, ಆರೋಗ್ಯ, ತಲಾದಾಯ, ಕೃಷಿ, ಹೈನಗಾರಿಕೆ, ಕೈಗಾರಿಕೆ, ಸೇವಾ ವಿಭಾಗ, ಸಾಮಾಜಿಕ ವಲಯಗಳ ಮಾನದಂಡಗಳ ಆಧಾರದ ಮೇಲೆ ಅಭಿವೃದ್ಧಿ ಸೂಚ್ಯಂಕವನ್ನು ನಿರ್ಧರಿಸಲಾಗುತ್ತದೆ. ಈ ಅಭಿವೃದ್ಧಿ ಸೂಚ್ಯಂಕವನ್ನು ಆಧರಿಸಿ ಹಿಂದುಳಿದ ತಾಲೂಕುಗಳು ಯಾವುವು ಎಂಬುದನ್ನು ಗುರುತಿಸಿ ಆ ತಾಲೂಕುಗಳ ಸರ್ವಾಂಗೀಣ ಅಭಿವೃದ್ಧಿಗೆ ಬೇಕಾಗುವ ಆರ್ಥಿಕ ಸೌಲಭ್ಯವನ್ನು ಒದಗಿಸಲು ಸರ್ಕಾರಕ್ಕೆ ಸಮಿತಿ ವತಿಯಿಂದ ಶಿಫಾರಸು ಮಾಡಲಾಗುವುದು ಎಂದು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷ ಪ್ರೊ.ಎಂ.ಗೋವಿಂದ ರಾವ್ ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಿತಿಯು ರಾಜ್ಯದ 240 ತಾಲ್ಲೂಕುಗಳ ಅಧ್ಯಯನ ನಡೆಸುತ್ತದೆ. ಕಲಬುರ್ಗಿ, ಬೆಳಗಾವಿ, ಮೈಸೂರು, ಬೆಂಗಳೂರು ಎಂಬ ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ. 240 ತಾಲ್ಲೂಕುಗಳಲ್ಲಿ ಅತ್ಯಂತ ಹಿಂದುಳಿದ ತಾಲ್ಲೂಕುಗಳು ಮತ್ತು ಅತೀ ಹಿಂದುಳಿದ ಹಾಗೂ ಹಿಂದುಳಿದ ತಾಲ್ಲೂಕುಗಳು,ಮುಂದುವರಿದ ತಾಲ್ಲೂಕುಗಳು, ಅತೀ ಮುಂದುವರಿದ ತಾಲ್ಲೂಕುಗಳು ಎಂದು ವಿಂಗಡಿಸಿ ಯಾವ ಕಾರಣಕ್ಕೆ ತಾಲ್ಲೂಕು ಹಿಂದುಳಿದಿದೆ ಎಂದು ತಿಳಿಯಲು, ಮುಂದುವರೆದಿರುವ ತಾಲ್ಲೂಕುಗಳಿಂದ ಹಿಂದುಳಿದ ತಾಲ್ಲೂಕುಗಳನ್ನು ಹೇಗೆ ಸುಧಾರಣೆ ಮಾಡಬೇಕು ಎಂಬ ಮಾಹಿತಿಯನ್ನು ತಾಲೂಕುವಾರು ಪಡೆಯಲಾಗುವುದು.

‘2002ರಲ್ಲಿ ಡಾ.ಡಿ.ಎಂ.ನಂಜುಂಡಪ್ಪ ವರದಿ ಅನ್ವಯ 175 ತಾಲ್ಲೂಕುಗಳ ಅಧ್ಯಯನ ನಡೆಸಿದ್ದರು. ಅದರಲ್ಲಿ 114 ತಾಲ್ಲೂಕುಗಳ ಪೈಕಿ 39 ತಾಲ್ಲೂಕು ಅತೀ ಹಿಂದುಳಿದ, 40 ಅತ್ಯಂತ ಹಿಂದುಳಿದ, 35 ಹಿಂದುಳಿದ ತಾಲ್ಲೂಕುಗಳು ಎಂದು ಗುರ್ತಿಸಲಾಗಿತ್ತು. ರಾಜ್ಯದ ಹಿಂದುಳಿದ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ 2007 ರಿಂದ 2023 ವರೆಗೆ 43456.96 ಕೋಟಿ ಶಿಫಾರಸ್ಸು ಮಾಡಲಾಗಿತ್ತು. ಅದರಲ್ಲಿ 35380.25 ಕೋಟಿ ಬಿಡುಗಡೆ ಆಗಿ 32610.24 ಕೋಟಿ ಖರ್ಚಾಗಿದೆ ಎಂದರು.

‘ರಾಜ್ಯ ಸರ್ಕಾರ 2024ರಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರ್ಥಿಕ ತಜ್ಞರನ್ನೊಳಗೊಂಡ ಸಮಿತಿ ರಚಿಸಿದ್ದು, ಈ ಸಮಿತಿಯು ಕೃಷಿ, ಕೈಗಾರಿಕೆ, ಆರ್ಥಿಕ ಮೂಲಸೌಲಭ್ಯ, ಸಾಮಾಜಿಕ ಸೌಲಭ್ಯ, ಹಣಕಾಸಿನ ಮತ್ತು ತಾಂತ್ರಿಕ ಮೂಲಸೌಕರ್ಯ ಮುಂತಾದ ವಲಯಗಳ ಅಭಿವೃದ್ಧಿಯನ್ನು ಗುರುತಿಸಿ, ಸೂಚ್ಯಂಕ ನಿಗದಿಪಡಿಸಲಿದೆ. ಸಮಿತಿಯು ಅಕ್ಟೋಬರ್ 2025 ಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಸುತ್ತದೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕುವಾರು ತಲಾದಾಯ ಅಂಕಿ ಅಂಶ:
ದೇವನಹಳ್ಳಿ ತಾಲೂಕು: 77.89
ದೊಡ್ಡಬಳ್ಳಾಪುರ ತಾಲೂಕು: 85.99
ಹೊಸಕೋಟೆ ತಾಲೂಕು: 91.96
ನೆಲಮಂಗಲ ತಾಲೂಕು: 131.54
ಬೆಂಗಳೂರು ಗ್ರಾಮಾಂತರ ಜಿಲ್ಲೆ : 95.60

ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕುಗಳು ರಾಜ್ಯದ ಸರಾಸರಿ ತಲಾದಾಯದಲ್ಲಿ ಹಿಂದುಳಿದ ತಾಲೂಕುಗಳಾಗಿವೆ. ಶಿಕ್ಷಣ ಹಾಗೂ ಆರೋಗ್ಯ ಸೂಚ್ಯಂಕದಲ್ಲಿ ಕ್ರಮವಾಗಿ ಅತ್ಯಂತ ಹಿಂದುಳಿದ ಜಿಲ್ಲೆಯಾಗಿದೆ ಎಂದರು.

ಜಿಲ್ಲೆಗೆ ಸಂಬಂಧಿಸಿದಂತೆ ಶಿಕ್ಷಣ, ಆರೋಗ್ಯ, ಕೈಗಾರಿಕೆ, ಕೃಷಿ, ಮೂಲಸೌಕರ್ಯ, ತಂತ್ರಜ್ಞಾನ, ಅಭಿವೃದ್ಧಿ, ಸಮಸ್ಯೆಗಳ ಬಗ್ಗೆ ವಿಷಯಾಧಾರಿತ ಚರ್ಚೆ ನಡೆಸಿದ ಸಮಿತಿಯು ಅಧಿಕಾರಿಗಳಿಂದ, ಜಿಲ್ಲೆಯ ಸಂಘ ಸಂಸ್ಥೆಗಳ ಮುಖಂಡರಿಂದ ಮಾಹಿತಿ ಪಡೆದುಕೊಂಡರು. ಸಮಿತಿಯು ಗುರುತಿಸಿರುವ ವಿಷಯಗಳಲ್ಲದೇ ಜಿಲ್ಲೆಗೆ ಸಂಬಂಧಿಸಿದಂತೆ ಇನ್ನೂ ಅನೇಕ ವಿಷಯಗಳನ್ನು ಗಮನಿಸಲಿದೆ’ ಎಂದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಬೆಂಗಳೂರು ನಗರಕ್ಕೆ ಹೊಂದಿಕೊಂಡಿದ್ದರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದೇವೆ. ಕುಡಿಯುವ ನೀರು ಪೂರೈಕೆ, ರೈಲ್ವೇ ಸೌಕರ್ಯ, ತ್ಯಾಜ್ಯ ನಿರ್ವಹಣೆ ಘಟಕಗಳು, ನೀರು ಶುದ್ಧೀಕರಣ ಘಟಕಗಳು ಸ್ಥಾಪನೆ ಆಗಬೇಕಿದೆ. ಮೆಡಿಕಲ್ ಕಾಲೇಜು ಆಗಬೇಕು, ಜಿಲ್ಲಾ ಆಸ್ಪತ್ರೆಗೆ ಅನುದಾನದ ಅವಶ್ಯಕತೆ ಇದ್ದು ಜಿಲ್ಲೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಪತ್ರದ ಮುಖೇನ ನೀಡಲಾಗುವುದು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಮಿತಿಯಲ್ಲಿ ಕೋರಿದರು.

ಸಭೆಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಸದಸ್ಯರಾದ ಎಂ.ಎಚ್. ಸೂರ್ಯನಾರಾಯಣ, ಸಿಇಒ ಡಾ.ಕೆ ಎನ್ ಅನುರಾಧ, ಜಿ.ಪಂ ಉಪಕಾರ್ಯದರ್ಶಿ ರಮೇಶ್, ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!