NEWSಶಿಕ್ಷಣ

ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭ: 7.13 ಲಕ್ಷ ವಿದ್ಯಾರ್ಥಿಗಳೆಲ್ಲರಿಗೂ ಶುಭ ಕೋರಿದ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 (2nd PUC Exam) ಶನಿವಾರದಿಂದ (ಮಾರ್ಚ್​ 1) ರಾಜ್ಯಾದ್ಯಂತ ಆರಂಭವಾಗಿದ್ದು, ಮಾರ್ಚ್ 20ರವರೆಗೆ ನಡೆಯಲಿವೆ.

ರಾಜ್ಯಾದ್ಯಂತ ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7,13,862 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ: ಈ ಬಾರಿ ಪರೀಕ್ಷೆಯಲ್ಲಿನ ಪಾರದರ್ಶಕತೆ ಕಾಪಾಡಿಕೊಳ್ಳಲು ಎಲ್ಲ ಪರೀಕ್ಷಾ ಕೊಠಡಿಯೊಳಿಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೊಠಡಿಯೊಳಗೆ ಮೊಬೈಲ್, ಎಲೆಕ್ಟ್ರಾನಿಕ್ ವಾಚ್, ಕ್ಯಾಲುಕೇಟರ್ ತೆಗೆದುಕೊಂಡು ಹೋವುವುದನ್ನು ನಿಷೇಧಿಸಲಾಗಿದೆ.

ಇನ್ನು ಸಾಮಾನ್ಯುವಾಗಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಾಲಾಗಿದೆ. ಜೆರಾಕ್ಸ್ ಅಂಗಡಿಗಳಿಗೆ ನಿರ್ಬಂಧಿಸಲಾಗಿದೆ. ಮತ್ತು ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದ್ದು ಈ ಬಗ್ಗೆ ಈಗಾಗಲೇ ಸುತ್ತೋಲೆಯನ್ನು ಕೂಡ ಪರೀಕ್ಷಾ ಪ್ರಾಧಿಕಾರ ಹೊರಡಿಸಿದೆ.

ಸರ್ಕಾರಿ ಬಸ್​ಗಳಲ್ಲಿ ಉಚಿರ ಪ್ರಯಾಣ: ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಾಲ್ಕೂ ಸಾರಿಗೆ ನಿಗಮಗಳ ಸಾಮಾನ್ಯ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಪರೀಕ್ಷೆಗೆ ಹಾಜರಾಗುವವರ ಸಂಖ್ಯೆ ಹೆಚ್ಚಳ: ‘‘ಹಿಂದಿನ ವರ್ಷಕ್ಕೆ ಹೋಲಿಸಿದರೆ, ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಎರಡಕ್ಕೂ ಹೆಸರು ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ 15,238 ಮಂದಿ ಹೆಚ್ಚಾಗಿದ್ದರೆ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡವರ ಸಂಖ್ಯೆಯಲ್ಲಿ 26,479 ಹೆಚ್ಚಳವಾಗಿದೆ’’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದರು.

ವೆಬ್ ಕಾಸ್ಟಿಂಗ್ ವ್ಯವಸ್ಥೆ: ಈ ಬಾರಿ ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಿ ಪಾರದರ್ಶಕತೆ ಹೆಚ್ಚಿಸಲು ಪರೀಕ್ಷಾ ಕೇಂದ್ರಗಳ ಪ್ರತಿ ಕೊಠಡಿಯಲ್ಲೂ ಸಿಸಿಕ್ಯಾಮೆರಾ ಅವಳಡಿಕೆ ಜೆತೆಗೆ ಅಲ್ಲಿನ ಚಿತ್ರಣವನ್ನು ಜಿಲ್ಲಾ ಮಟ್ಟದ ನಿಯಂತ್ರಣ ಕೊಠಡಿಯಲ್ಲಿ ಕೂತು ವೀಕ್ಷಿಸಲು ವೆಬ್‌ ಕಾಸ್ಟಿಂಗ್ ಕಣ್ಣಾದಲು ವ್ಯವಸ್ಥೆ ಅಳವಡಿಸಲಾಗಿದೆ. ಉನ್ನತ ಅಧಿಕಾರಿಗಳು ಈ ಕೇಂದ್ರಗಳಲ್ಲಿ ಕುಳಿತು ತಮ್ಮ ಜಿಲ್ಲಾ ವ್ಯಾಪ್ತಿಯ ಯಾವುದೇ ಕೇಂದ್ರದ ಯಾವುದೇ ಕೊಠಡಿಯಲ್ಲಿನ ಆಗುಹೋಗುಗಳನ್ನು ವೀಕ್ಷಿಸುತ್ತಿರುತ್ತಾರೆ.

ಯಾವುದೇ ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮದಲ್ಲಿ ತೊಡಗಿರುವುದು, ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಸಮಯಕ್ಕೆ ಸರಿಯಾಗಿ ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆಗಳನ್ನು ನೀಡದೆ ಲೋಪವೆಸಗುವುದು, ಸಾಮೂಹಿಕ ನಕಲು ಮಾಡಿಸುವಂತಹ ಯಾವುದೇ ಅಕ್ರಮಗಳು ಕಂಡುಬಂದರೆ ತಕ್ಷಣ ಕಾನೂನು ಕ್ರಮ ಜರುಗಿಸಲಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಬಹಳ ಎಚ್ಚರಿಕೆಯಿಂದ ಪರೀಕ್ಷೆ ಬರೆಯಬೇಕು.

ಎಚ್‌ಡಿಕೆ ವಿಶ್‌: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ಎಲ್ಲ ಮಕ್ಕಳಿಗೆ ನನ್ನ ಶುಭ ಹಾರೈಕೆಗಳು. ಪರೀಕ್ಷೆ ಬರೆಯುತ್ತಿರುವ 7.13 ಲಕ್ಷ ವಿದ್ಯಾರ್ಥಿಗಳೆಲ್ಲರಿಗೂ ಶುಭವಾಗಲಿ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ.

ಪರೀಕ್ಷೆ ನಿಮ್ಮ ಜೀವನದ ಒಂದು ಘಟ್ಟವಷ್ಟೇ. ಆತ್ಮವಿಶ್ವಾಸ ಹಾಗೂ ಉತ್ತಮ ತಯಾರಿಯೊಂದಿಗೆ ಎದುರಿಸಿ. ಯಾವುದೇ ಕಾರಣಕ್ಕೂ ಹೆದರುವ ಅಗತ್ಯವಿಲ್ಲ. ತಾಯಿ ಶಾರದೆಯ ಕೃಪೆ ನಿಮ್ಮೆಲ್ಲರ ಮೇಲೆ ಇರಲಿ, ಗುರಿ ಮುಟ್ಟಲು ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!