ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಏ.21) ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ನೂರಾರು ಸಂಖ್ಯೆಯಲ್ಲಿ ರಜೆಯಲ್ಲಿ ಇರುವ ನೌಕರರು ಭಾಗವಹಿಸಬೇಕು ಎಂದು ಒಕ್ಕೂಟದ ಪದಾಧಿಕಾರಿಗಳು ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಸಾರಿಗೆ ನೌಕರರ ವಿವಿಧ ಸಂಘಟನೆಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟದಡಿಯಲ್ಲಿ ಈ ಉಪವಾಸ ಧರಣಿ ಸತ್ಯಾಗ್ರಹವನ್ನು ನಾಳೆ ಬೆಳಗ್ಗೆಯಿಂದ ಫ್ರೀಡಂ ಪಾರ್ಕ್ನಲ್ಲಿ ಆರಂಭಿಸಲಾಗುತ್ತಿದೆ.
ಬಸ್ ನಿಲ್ಲಿಸಿ ಮುಷ್ಕರ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಅಧಿಕಾರಿಗಳು ನಮ್ಮ ಶಾಂತಿಯುತ ಹೋರಾಟವನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಅದರಂತೆ ಈ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವುದಕ್ಕೆ ಬೇಷರತ್ತಾಗಿ ಬೆಂಬಲ ನೀಡಲಿದ್ದಾರೆ.
ಇನ್ನು ಸಾರಿಗೆ ನೌಕರರಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಅಂದರೆ ವಿಧಾನಸಭಾ ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿ ಮಾಡಬೇಕು ಎಂದು ಬೇಡಿಕೆ ಸಮಸ್ತ ಅಧಿಕಾರಿಗಳು ಹಾಗೂ ನೌಕರರ ಆಗ್ರಹವಾಗಿದೆ.
ಇದರ ಜತೆಗೆ 01/01/2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ನೀಡಬೇಕು (ನಿವೃತ್ತ ನೌಕರರಿಗೆ ಮೊದಲ ಅದ್ಯತೆಯಲ್ಲಿ ಅವರ ಹಿಂಬಾಕಿ ಮತ್ತು ಇತರೆ ಸೇವಾ ಆರ್ಥಿಕ ಸೌಲಭ್ಯಗಳನ್ನು ನೀಡುವುದು.
ಇದರ ನಡುವೆ ಸಾರಿಗೆ ಸಂಘಟನೆಗಳ ಮುಖಂಡರು ಅದರಲ್ಲೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು 1992 ನಂತರ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಯದೆ ಇರುವುದರಿಂದ, ಕೂಡಲೆ” ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ಮಾಡಲು ಆದೇಶ ಮಾಡಬೇಕು ಎಂದು ಒತ್ತಾಯಿಸಿ ಈ ಉಪವಾಸ ಧರಣಿ ಹಮ್ಮಿಕೊಂಡಿದ್ದು, ನೌಕರರು ಹಾಗೂ ನೌಕರರ ಕುಟುಂಬದವರು ಭಾಗವಹಿಸಬೇಕು ಎಂದು ಕೋರಿದ್ದಾರೆ.
ಇನ್ನು ಈ ಉಪವಾಸ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವ ಮುನ್ನ ಅಂದರೆ ಇದೇ ಏ.8ರಿಂದ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಿಂದ ಬೆಂಗಳೂರಿನ ವರೆಗೆ ಏ.21ರವರೆಗೂ ಪಾದಯಾತ್ರೆ ಜಾಥಾ ಹಮ್ಮಿಕೊಂಡು ಬರುತ್ತಿದ್ದು, ನಾಳೆಗೆ 14 ದಿನಗಳ ಪಾದಯಾತ್ರೆ ಬೆಂಗಳೂರಿನ ಫ್ರೀಡಂಪಾರ್ಕ್ ತಲುಪುವ ಮೂಲಕ ಪೂರ್ಣಗೊಳ್ಳಲಿದ್ದು ನಾಳೆಯಿಂದ ಬೇಡಿಕೆ ಈಡೇರುವವರೆಗೂ ಆಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತಿದೆ.
Related










